ವಿಜಯಪುರ:ಕೊರೊನಾ ಸೋಂಕಿತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಆಘಾತಕಾರಿ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಕಾರ್ಯೋನ್ಮುಖರಾದ ಜಿಲ್ಲಾಧಿಕಾರಿ ಬಹಿಷ್ಕಾರ ಹಾಕದಂತೆ ಸ್ಥಳೀಯರಿಗೆ ಎಚ್ಚರಿಕೆ ನೀಡಿ ಸೋಂಕಿತನ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದ್ದಾರೆ.
ಹೌದು ವಿಜಯಪುರ ನಗರದ ಬಡವಣೆಯೊಂದರಲ್ಲಿ ಕೊರೊನಾ ಸೋಂಕಿತ ಕುಟುಂಬಕ್ಕೆ ಸ್ಥಳೀಯರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಇದರಿಂದ ಆತಂಕಕ್ಕೊಳಗಾದ ಸೋಂಕಿತ ಕುಟುಂಬ ಜಿಲ್ಲಾಧಿಕಾರಿಗೆ ದೂರು ನೀಡಿದೆ. ತಕ್ಷಣವೇ ಕಾರ್ಯೋನ್ಮುಖರಾದ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಸೋಂಕಿತರ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದು ಸರಿಯಲ್ಲ. ಇಂಥ ಘಟನೆ ಮರುಕಳಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ನಿಯಮಾವಳಿಯಂತೆಯೇ ಸೋಂಕಿತ ಕುಟುಂಬ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಡಾವಣೆ ಜನರು ಇದಕ್ಕೆ ಸಹಕರಿಸಬೇಕೆಂದು ವಿನಂತಿಸಿದ್ದಾರೆ. ಹಾಗೇನೆ ಪಾಲಿಕೆ ಆಯುಕ್ತ ಹರ್ಷ ಶೇಟ್ಟಿಯವರಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಲು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಸೋಂಕಿತರಿದ್ದ ಬಡಾವಣೆಗೆ ಆಗಮಿಸಿದ್ದ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ. ಪಾಲಿಕೆ ವತಿಯಿಂದ ತರಕಾರಿ, ಔಷಧಿ, ಪಡಿತರ ವ್ಯವಸ್ಥೆ ಸೇರಿದಂತೆ ಸೋಂಕಿತ ಕುಟುಂಬಕ್ಕೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ ಬಡವಾಣೆ ಜನರಿಗೂ ಸಹಕರಿಸುವಂತೆ ಮನವಿ ಮಾಡಿದ್ದಾರೆ.